ಗದಗ.ಮಾ.6:
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿರುವ ಬಜೆಟ್ನಲ್ಲಿ ಯಾವುದೇ ವಿಶೇಷ ಅಂಶಗಳಿಲ್ಲ ಎಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕಿಸಿದ್ದಾರೆ.
ಮುಖ್ಯಮಂತ್ರಿಗಳು ಬಜೆಟ್ ಮಂಡಿಸಿ ದಾಖಲೆ ಮಾಡಿರಬಹುದು. ಆದರೆ ಆ ಬಜೆಟ್ನಲ್ಲಿ ದಾಖಲೆಯಾಗುವಂತಹ ಯಾವುದೇ ಅಂಶಗಳಿಲ್ಲ. ಈ ಬಜೆಟ್ನಲ್ಲಿ ಮತದಾರರನ್ನು ಒಲಿಸಿಕೊಳ್ಳುವ ಉದ್ದೇಶದಿಂದ ಕೆಲವು ವರ್ಗಗಳ ಓಲೈಕೆ ಸ್ಪಷ್ಟವಾಗಿ ಕಾಣುತ್ತದೆ.
ಬಜೆಟ್ ಎಂದರೆ ಅಭಿವೃದ್ಧಿ ಪರವಾಗಿರಬೇಕು. ಆದರೆ ಈ ಬಜೆಟ್ಗೆ ಯಾವುದೇ ಗುರಿ ಇಲ್ಲದಿರುವುದು ವಿಷಾದನೀಯ ಎಂದು ಅವರು ತಿಳಿಸಿದ್ದಾರೆ.
ಭರವಸೆ ಯೋಜನೆಗಳ ಹೆಸರಿನಲ್ಲಿ ಸುಳ್ಳುಗಳನ್ನು ಹೇಳಿ ಅಧಿಕಾರಕ್ಕೆ ಬಂದ ನಂತರ ನುಡಿದಂತೆ ನಡೆದಿದ್ದೇವೆ ಎಂದು ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಜಾಹಿರಾತುಗಳನ್ನು ನೀಡಲಾಗಿದೆ. ಆದರೆ ಈ ಯೋಜನೆಗಳಲ್ಲಿ ಯಾವುದೂ ತಮ್ಮ ಗುರಿಯನ್ನು ತಲುಪಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಐದು ಭರವಸೆಗಳು ನಮ್ಮ ಶಕ್ತಿ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಅವರು ಯುವ ನಿಧಿಗೆ ಬಜೆಟ್ನಲ್ಲಿ ನಯಪೈಸೆಯನ್ನೂ ಮೀಸಲಿಡದಿರುವುದು ಸರ್ಕಾರಕ್ಕೆ ಯುವ ಪೀಳಿಗೆಯ ಬಗ್ಗೆ ಕಾಳಜಿ ಇಲ್ಲವೆಂಬುದನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಇದೇ ಪರಿಸ್ಥಿತಿ ಮುಂದುವರಿದರೆ ಧಾರವಾಡದಲ್ಲಿ ಯುವಕರು ದಂಗೆ ಎದ್ದಂತೆ ರಾಜ್ಯಾದ್ಯಂತ ಯುವಕರು ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.
ಅಭಿವೃದ್ಧಿಗೆ ಹೊಸ ಯೋಜನೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಹೊಸ ಯೋಜನೆಗಳು ಈ ಬಜೆಟ್ನಲ್ಲಿ ಇಲ್ಲದಿರುವುದು ನಿರಾಶಾದಾಯಕವಾಗಿದೆ ಎಂದು ಅವರು ಹೇಳಿದ್ದಾರೆ.
ಒಟ್ಟಾರೆ ಈ ಬಜೆಟ್ಗೆ ಯಾವುದೇ ಗುರಿ ಇಲ್ಲದ ಬಜೆಟ್ ಆಗಿದೆ ಎಂದು ಅವರು ಟೀಕಿಸಿದ್ದಾರೆ.
