ಮುಂಡರಗಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಂಡರಗಿ ತಾಲೂಕು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇಂದು ತಾಲೂಕು ಆಡಳಿತಕ್ಕೆ ಮನವಿ ಪತ್ರ ಸಲ್ಲಿಸುವ ಮೂಲಕ ಪ್ರತಿಭಟನೆಯ ಕಹಳೆ ಮೊಳಗಿಸಿದರು.
ರಾಜ್ಯಾದ್ಯಂತ ಮಾರ್ಚ್ 11, 2026ರಿಂದ ಹಮ್ಮಿಕೊಳ್ಳಲಾಗಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿರುವ ತಾಲೂಕಿನ ಆರೋಗ್ಯ ಸಿಬ್ಬಂದಿಗಳು, ಮುಂಡರಗಿಯ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಹಾಗೂ ಪೊಲೀಸ್ ಆರಕ್ಷಕ ನಿರೀಕ್ಷಕರಿಗೆ (ಸಿಪಿಐ) ಅಧಿಕೃತವಾಗಿ ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ (THO) ಡಾ. ಸಂತೋಷ್ ಪಾಟೀಲ್ ಅವರು, ಇಲಾಖೆಯಲ್ಲಿನ ಸಿಬ್ಬಂದಿಗಳ ಹಿತರಕ್ಷಣೆ ಹಾಗೂ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಪ್ರಮುಖ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಸರ್ಕಾರವು ಆರೋಗ್ಯ ಸಿಬ್ಬಂದಿಗಳ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಅವರು ಆಗ್ರಹಿಸಿದರು.
ಆರೋಗ್ಯ ಇಲಾಖೆಯ ಜಿಲ್ಲಾ ಸಂಘದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಕಲಕಂಬಿ ಅವರು ಮಾತನಾಡಿ, ಆರೋಗ್ಯ ಸಿಬ್ಬಂದಿಗಳ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲಿ ಈಡೇರಿಸಬೇಕು. ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯು ಸಂಪೂರ್ಣ ಬೆಂಬಲ ಘೋಷಿಸಿದೆ. ಸಂಘದ ತಾಲೂಕು ಅಧ್ಯಕ್ಷರಾದ ಶ್ರೀ ನಾಗರಾಜ್ ಹಳ್ಳಿಕೇರಿ ಅವರು ತಮ್ಮ ಪದಾಧಿಕಾರಿಗಳೊಂದಿಗೆ ಆಗಮಿಸಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಹೋರಾಟಕ್ಕೆ ಸಾಥ್ ನೀಡಿದರು.
ಕಾರ್ಯಕ್ರಮದಲ್ಲಿ TLH ಡಾ. ಲಕ್ಷ್ಮಣ್ ಪೂಜಾರ, ಡಾ. ಐಶ್ವರ್ಯ ಮೇಡಂ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ವೃಂದದ ಅಧಿಕಾರಿಗಳು ಹಾಗೂ ನೂರಾರು ಸಿಬ್ಬಂದಿಗಳು ಭಾಗವಹಿಸಿದ್ದರು.
ಮಾರ್ಚ್ 11ರಿಂದ ಆರಂಭವಾಗುವ ಮುಷ್ಕರದಲ್ಲಿ ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರಾಗುವ ಸಾಧ್ಯತೆ ಇರುವುದರಿಂದ ತಾಲೂಕಿನ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಆರೋಗ್ಯ ಸಿಬ್ಬಂದಿಗಳು ಮನವಿ ಮಾಡಿಕೊಂಡರು.
