ಗದಗ: ಸರ್ಕಾರದ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಖದೀಮರು ಬೆಟಗೇರಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬೆಟಗೇರಿ ಪೊಲೀಸ್ ಠಾಣೆಯ ಪೋಲೀಸ್ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ, 1 ಲಕ್ಷ 12 ಸಾವಿರ ಮೌಲ್ಯದ 313 ಕೆಜಿ ಹಾಲಿನ ಪುಡಿಯನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಸಂತೋಷ ಶಿಂಧೆ ಮತ್ತು ಕಾಜಾಹುಸೇನ್ ಎಂಬ ಇಬ್ಬರನ್ನು ಬಂಧಿಸಲಾಗಿದೆ.

ಅವರಿಂದ ಹಾಲಿನ ಪುಡಿ ಹಾಗೂ ಮಿನಿ ಲಾರಿ ವಶಪಡಿಸಿಕೊಂಡು, ಅವರ ವಿರುದ್ಧ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ಮಕ್ಕಳು ಮತ್ತು ವಿದ್ಯಾರ್ಥಿಗಳ ಪೋಷಕ ಆಹಾರವಾಗಿ ಬಳಕೆಯಾಗಬೇಕಿದ್ದರೆ, ಅದನ್ನು ದುರುಪಯೋಗಪಡಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಪ್ರಕರಣ ಕುರಿತಂತೆ ಮುಂದಿನ ತನಿಖೆ ನಡೆಸಲಾಗುತ್ತಿದ್ದು, ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.